ಪೂರ್ವಭಾವಿ ಸಿದ್ಧತಾ ಸಭೆ
ಕೊಪ್ಪಳ ಜಿಲ್ಲಾದ್ಯಂತ ಬಾಪೂಜಿ ಪ್ರಬಂಧ ಸ್ಪರ್ಧೆ ಅಚ್ಚುಕಟ್ಟಾಗಿ ನಡೆಯಲಿ:ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾತ್ಮಾ ಗಾಂಧೀಜಿಯವರ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ ಏರ್ಪಡಿಸುವ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾ ಪಂಚಾಯತ್ ಸಮಿತಿ ಕೊಠಡಿ ಸಭಾಂಗಣದಲ್ಲಿ ಆಗಸ್ಟ್ 31ರಂದು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ. ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿ ಯುವಜನರಲ್ಲಿ ಅರಿವು ಮೂಡಿಸಲು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ರಾಜ್ಯಾದ್ಯಂತ ಜಿಲ್ಲಾ ಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಕೊಪ್ಪಳ ಜಿಲ್ಲೆಯಲ್ಲಿ ಸಹ ಈ ಸ್ಪರ್ಧೆಯನ್ನು ಏರ್ಪಡಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಅರೇ ಸರ್ಕಾರಿ ಪ್ರೌಢಶಾಲೆಗಳಲ್ಲಿ, ಪಿಯು ಕಾಲೇಜುಗಳಲ್ಲಿ ಹಾಗೂ ಪದವಿ-ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ಸ್ಪರ್ಧೆಗಳು ನಡೆಯುವಂತಾಗಬೇಕು ಎಂದು ತಿಳಿಸಿದರು.
ಎಲ್ಲಾ ಕಡೆಗಳಲ್ಲಿ ಸ್ಪರ್ಧೆಗಳು ನಡೆದು ಅಲ್ಲಿಂದ ಬಂದ ಪ್ರಬಂಧಗಳನ್ನು ಮೌಲ್ಯಮಾಪನ ಮಾಡಿ ಅತ್ಯುತ್ತಮ ಪ್ರಬಂಧಗಳಿಗೆ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ಎಂದು ಮೂರು ಹಂತದಲ್ಲಿ ತಲಾ ಮೂರು ಬಹುಮಾನ ನೀಡಲು ಮತ್ತು ಜಿಲ್ಲಾಮಟ್ಟದಲ್ಲಿ ಬಹುಮಾನಕ್ಕೆ ಆಯ್ಕೆಯಾದ ಪ್ರಬಂಧಗಳನ್ನು ರಾಜ್ಯಮಟ್ಟದ ಬಹುಮಾನಕ್ಕೆ ಕಳುಹಿಸಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಪ್ರೌಢಶಾಲಾ ಹಂತದಲ್ಲಿ ಸ್ಪರ್ಧೆಯನ್ನು ಆಯೋಜನೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಪಿಯು ಕಾಲೇಜುಗಳಲ್ಲಿ ಸ್ಪರ್ಧೆ ಆಯೋಜನೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಪದವಿ ಕಾಲೇಜುಗಳಲ್ಲಿ ಸ್ಪರ್ಧೆ ಆಯೋಜನೆ ಮಾಡಲು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ಸ್ಪರ್ಧೆ ಆಯೋಜನೆ ಮಾಡಲು ಕೊಪ್ಪಳ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲ ಹಾಸ್ಟೆಲಗಳ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಹಾಗೆ ಎಲ್ಲ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸ್ಪರ್ದೇಯ ಮಾಹಿತಿ ರವಾನಿಸಲು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಪ್ರಬಂಧಗಳ ಆಯ್ಕೆಯು ಪಾರದರ್ಶಕವಾಗಿ ನಡೆಯಬೇಕು. ಅಕ್ಟೋಬರ್ 2ರಂದು ನಡೆಯುವ ಮಹಾತ್ಮ ಗಾಂಧೀಜಿ ಜಯಂತಿ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆಗೆ ಏರ್ಪಾಡು ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜನೆಗೆ ಮತ್ತು ಅಕ್ಟೋಬರ್ 2ರಂದು ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಸುತ್ತೋಲೆಯಲ್ಲಿ ತಿಳಿಸಿದಂತೆ ನಾನಾ ಕಾರ್ಯಕ್ರಮಗಳಿಗೆ ತಯಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ
ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಹಾಗೆ ಇಲಾಖೆಯಿಂದ ನಾನಾ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪದವಿ ಪೂರ್ವ
ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಗದೀಶ್ ಜಿ.ಹೆಚ್., ಕೊಪ್ಪಳ ವಿಶ್ವ ವಿದ್ಯಾಲಯದ ನಿರ್ದೇಶಕರಾದ ಡಾ.ಪ್ರಕಾಶ ಯಳವಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಬಿಲ್ಖಸ್ ಜಹಾನ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಕರಾದ ಬಸವರಾಜ ನೆಲಗಣಿ, ವಾರ್ತಾ ಇಲಾಖೆಯ ಪ್ರ.ದ.ಸ ಭರತ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030