ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ; ಪೂರ್ವಭಾವಿ ಸಭೆ
ಬಾಲಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಿ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್
ಬಳ್ಳಾರಿ:ಇದೇ ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು. ಬಾಲಕಾರ್ಮಿಕರನ್ನು ರಕ್ಷಿಸಿ, ಅವರಿಗೆ ಪುನರ್ವಸತಿ ಕಲ್ಪಿಸುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಬೇಕು. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಎಂದು ಡಿಡಿಪಿಐ ಅವರಿಗೆ ಸೂಚಿಸಿದರು.
ಜೂ.12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಕುರಿತು ಅರಿವು ಮೂಡಿಸಲು ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ನಂತರ ವೇದಿಕೆ ಕಾರ್ಯಕ್ರಮ ಆಯೋಜಿಸಬೇಕು. ನೂರಿತ ಸಂಪನ್ಮೂಲ ವ್ಯಕ್ತಿಗಳಿಂದ ಬಾಲಕಾರ್ಮಿಕ ಪದ್ಧತಿ ಕುರಿತು ವಿಶೇಷ ಉಪನ್ಯಾಸ ನೀಡಲು ಕರೆಸಬೇಕು ಎಂದು ತಿಳಿಸಿದರು.
ಪ್ರಸ್ತಕ ಸಾಲಿನ ಶಾಲಾ ತರಗತಿಗಳು ಆರಂಭವಾಗಿರುವುದರಿಂದ, ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಕೆಲಸವಾಗಬೇಕು. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಬೇಕು. ವಿವಿಧ ಕೆಲಸಗಳಲ್ಲಿ ತೊಡಗಿರುವ ಬಾಲಕಾರ್ಮಿಕರನ್ನು ಪತ್ತೆಹಚ್ಚಿ ಶೈಕ್ಷಣಿಕವಾಗಿ ಮುನ್ನಲೆಗೆ ತರಲು ಪೋಷಕರ ಮನಃ ಪರಿವರ್ತನೆಗೊಳಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿಯನ್ನು ತಡೆಯಲು ಎಲ್ಲಾ ಇಲಾಖೆ ಮತ್ತು ಸಂಘ-ಸಂಸ್ಥೆಗಳ ಸಹಕಾರ ಅಗತ್ಯವಿದೆ ಎಂದರು.
ಸಭೆಯಲ್ಲಿ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಫ್ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ಕುಮಾರ್, ಡಿಡಿಪಿಐ ಉಮಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…
ವರದಿ. ವಿರೇಶ್, ಎಚ್, ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030