ಸ್ವಚ್ಛತೆಯ ಮಹತ್ವ ಕುರಿತು ಜಾಗೃತಿ ಇರಲಿ: ಮೇಯರ್ ಮುಲ್ಲಂಗಿ ನಂದೀಶ್
ಬಳ್ಳಾರಿ,:ಪರಿಸರ ಸ್ವಚ್ಚ ಇದ್ದಾಗ ಮಾತ್ರ ಆರೋಗ್ಯವಾಗಿ ಜೀವಿಸಲು ಸಾಧ್ಯವಾಗಿದ್ದು, ಸಾರ್ವಜನಿಕರಿಗೆ ಶುಚಿತ್ವದ ಮಹತ್ವ ಕುರಿತು ಜಾಗೃತಿ ಹೊಂದಬೇಕು ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ವತಿಯಿಂದ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬಳಿಯ ಬುಡಾ ಕಚೇರಿ ಆವರಣದ ಉದ್ಯಾನವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಾನಗರ ಪಾಲಿಕೆಯ ಸಿಬ್ಬಂದಿಯವರು ನಸುಕಿನ ಮುಂಜಾನೆ ವೇಳೆಯಲ್ಲೇ ನಗರ ಸ್ವಚ್ಚತೆ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ. ಸಾರ್ವಜನಿಕರು ಕಸದ ತ್ಯಾಜ್ಯವನ್ನು ವಿಂಗಡಿಸಿ ಪಾಲಿಕೆಯ ವಾಹನಗಳಿಗೆ ನೀಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಸ್ವಚ್ಚತೆಯು ಒಂದು ಸೇವೆಯಾಗಿದ್ದು, ಪ್ರತಿಯೊಬ್ಬರೂ ಆಂತರಿಕ ಮತ್ತು ಬಹಿರಂಗವಾಗಿಯೂ ಸ್ವಚ್ಚವಾಗಬೇಕಿದೆ. ರೋಗ-ರುಜಿನ ಹೆಚ್ಚಾದಾಗ ಸ್ವಚ್ಚತೆಯ ಅರಿವು ಮೂಡುತ್ತದೆ. ಹಾಗಾಗಿ ಸ್ವಚ್ಚತೆ ಕಾರ್ಯವೂ ಒಂದೇ ದಿನಕ್ಕೆ ಸೀಮಿತವಾಗದೆ, ದೈನಂದಿನ ಚಟುವಟಿಕೆಗಳಲ್ಲಿ ಮತ್ತು ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆಯಿಂದ ಕಾಪಾಡುವುದು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಲ್ಲೆಯಾದ್ಯಂತ ಕಳೆದ 15 ದಿನಗಳಿಂದ ಸ್ವಚ್ಚತಾ ಸ್ವಪ್ತ ಆಂದೋಲನ ಕೈಗೊಂಡು ನಗರ ಗ್ರಾಮೀಣ ಪ್ರದೇಶ ಸೇರಿದಂತೆ ವಿವಿಧೆಡೆ ಶುಚಿತ್ವಗೊಳಿಸಲಾಗಿದೆ. ಎಲ್ಲರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡೋಣ ಎಂದರು.
ಇದೇ ವೇಳೆ ಸ್ವಚ್ಚತೆ ಕುರಿತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಪೌರ ಕಾರ್ಮಿಕರು, ಸಾರ್ವಜನಿಕರು ಮತ್ತು ಇತರರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030