ವಿಧಾನಸಭೆ ಉಪಚುನಾವಣೆ 2024; ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ…!!!

Listen to this article

ವಿಧಾನಸಭೆ ಉಪಚುನಾವಣೆ 2024; ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ
ಪಾರದರ್ಶಕ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,:ಕೇಂದ್ರ ಚುನಾವಣಾ ಆಯೋಗವು 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ-2024 ಗೆ ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿ ಪ್ರಕಟಿಸಿದೆ. ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನ.13 ರಂದು ಮತದಾನ ಮತ್ತು ನ.23 ರಂದು ಮತಎಣಿಕೆ ನಡೆಯಲಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಸಂಡೂರು ವಿಧಾನಸಭೆ ಕ್ಷೇತ್ರ ಉಪ ಚುನಾವಣೆ-2024 ರ ಸಂಬoಧ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಂಡೂರು ವಿಧಾನಸಭೆ ಉಪಚುನಾವಣೆಗೆ ಹೊರಡಿಸಿರುವ ವೇಳಾಪಟ್ಟಿಯಂತೆ ಅ.18 (ಶುಕ್ರವಾರ) ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಅ.25 ರ ಶುಕ್ರವಾರ ಕೊನೆಯ ದಿನವಾಗಿದ್ದು, ಅ.28ರ ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.30 ಬುಧವಾರ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.13 ರ ಬುಧವಾರ ಮತದಾನ, ನ.23 ರ ಶನಿವಾರ ಮತ ಎಣಿಕೆ ಕಾರ್ಯ ನಡೆಯಲಿದ್ದು, ನ.25 ರ ಸೋಮವಾರದಂದು ಸಂಪೂರ್ಣ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಾದ ದಿನವಾಗಿದೆ ಎಂದು ತಿಳಿಸಿದರು.
ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರು, 253 ಮತಗಟ್ಟೆ:
ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. 1,17,789 ಪುರುಷ ಮತದಾರರು, 1,18,282 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಮತಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.
08 ಚೆಕ್‌ಪೋಸ್ಟ್ ಕಾರ್ಯನಿರ್ವಹಣೆ:
ಚುನಾವಣಾ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಂಡೂರು (ಪ.ಪಂ) ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 08 ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯೊಳಗೆ 02- ಜಿಂದಾಲ್(ವಿದ್ಯಾನಗರ ಏರ್‌ಪೋರ್ಟ್), ವೇಣಿ ವೀರಾಪುರ. ಅಂತರ್‌ಜಿಲ್ಲಾ 04-ಮೊತಲಕುಂಟ, ಕೊಂಡಾಪುರ ಗ್ರಾಮ, ವೆಂಕಟಗಿರಿ ಗ್ರಾಮ, ಶ್ರೀರಾಮ ಶೆಟ್ಟಿಹಳ್ಳಿ. ಅಂತರ್‌ರಾಜ್ಯ ಗಡಿಭಾಗದಲ್ಲಿ 02-ಜಿ.ಬಸಾಪುರ, ಎಂ.ಗoಗಲಾಪುರ ಗ್ರಾಮದ ಬಳಿ ಚೆಕ್‌ಪೋಸ್ಟ್ ಹಾಕಲಾಗಿದೆ.
ತಂಡಗಳ ರಚನೆ:
ನೀತಿ ಸಂಹಿತೆ ಉಲ್ಲಂಘನೆಯಾಗದoತೆ ನೋಡಿಕೊಳ್ಳಲು ಹಲವು ತಂಡಗಳನ್ನು ರಚಿಸಲಾಗಿದೆ. ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ 20 ಸೆಕ್ಟರ್ ಅಧಿಕಾರಿಗಳು, 9 ಎಫ್‌ಎಸ್‌ಟಿ ತಂಡ, 08 ಎಸ್‌ಎಸ್‌ಟಿ ತಂಡ, 01 ವಿವಿಟಿ ತಂಡ, 03 ವಿಎಸ್‌ಟಿ ತಂಡ, 01 ಸಹಾಯಕ ಚುನಾವಣೆ ವೆಚ್ಚ ವೀಕ್ಷಕರು, 1 ಅಕೌಂಟಿoಗ್ ತಂಡಗಳನ್ನು ರಚಿಸಲಾಗಿದೆ. ಅದರಂತೆ ಎಂಸಿಎoಸಿ ತಂಡಗಳನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದರು.
ಪಿ.ಆರ್.ಒ, ಎಪಿಆರ್‌ಒ, ಪಿಒ:
ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 304 ಪಿಆರ್‌ಒ, 304 ಎಪಿಆರ್‌ಒ ಮತ್ತು 608 ಜನ ಪಿಓ ಸೇರಿ ಒಟ್ಟು 1215 ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.
ಮತಯಂತ್ರಗಳ ಭದ್ರತಾ ಕೇಂದ್ರದ ವಿವರ:
ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮತಯಂತ್ರಗಳ ಭದ್ರತಾ ಕೇಂದ್ರವನ್ನಾಗಿ ಮಾಡಲಾಗಿದೆ. ಇಲ್ಲಿಯೇ ಮತಯಂತ್ರಗಳ ತರಬೇತಿ ನೀಡಲಾಗುವುದು. ಅದೇ ರೀತಿಯಾಗಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯ ಇಲ್ಲಿಯೇ ನಡೆಸಲಾಗುವುದು ಎಂದು ತಿಳಿಸಿದರು.
ಇವಿಎಂ, ವಿವಿಪ್ಯಾಟ್ ಮತಯಂತ್ರಗಳ ಮೊದಲ ಹಂತದ ಪರಿಶೀಲನೆ:


ಸಂಡೂರು ವಿಧಾನಸಭೆ ಉಪಚುನಾವಣೆಗೆ 505 ಬ್ಯಾಲೆಟ್ ಯುನಿಟ್, 503 ಕಂಟ್ರೋಲ್ ಯುನಿಟ್ ಮತ್ತು 492 ವಿವಿಪ್ಯಾಟ್ ಗಳ ಮೊದಲ ಹಂತದ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ 304 ಬ್ಯಾಲೆಟ್ ಯುನಿಟ್, 304 ಕಂಟ್ರೋಲ್ ಯುನಿಟ್ ಮತ್ತು 329 ವಿವಿಪ್ಯಾಟ್ ಮತಯಂತ್ರಗಳು ಅಗತ್ಯವಿದೆ ಎಂದರು.
ಕoಟ್ರೋಲ್ ರೂಂ ಆರಂಭ:
ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದ್ದು, ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ದೂರು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದಕ್ಕೆ ಮತ್ತು ಚುನಾವಣೆ ಸಂಬoಧಿತ ಸಾರ್ವಜನಿಕರ ಕುಂದು ಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 1950 ಅಥವಾ 08392-277100 ಗೆ ಕರೆ ಮಾಡಬಹುದು.
ಸಂಡೂರು ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿ:
ಎಲ್ಲಾ ಚುನಾಯಿತರಾದ ಹಾಗೂ ನಾಮ ನಿರ್ದೇಶಿತಗೊಂಡ ರಾಜಕೀಯ ಮುಖಂಡರಿಗೆ ನೀಡಲಾಗಿರುವ ಸರ್ಕಾರಿ ವಾಹನ ಸೌಲಭ್ಯವನ್ನು 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯಕ್ಕೆ ಬಳಸುವಂತಿಲ್ಲ. ಎಲ್ಲಾ ನಾಮ ನಿರ್ದೇಶನಗೊಂಡಿರುವoತಹ ನಿಗಮ ಮಂಡಳಿ ಹಾಗೂ ಸಮಿತಿಗಳನ್ನು ಸಂಪೂರ್ಣ ಉಪ-ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಅಮಾನತ್ತಿನಲ್ಲಿಡಲಾಗಿದೆ ಎಂದು ಡಿಸಿಯವರು ತಿಳಿಸಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ತಾಲ್ಲೂಕು ಪಂಚಾಯತಿ, ಗ್ರಾಮ ಪಂಚಾಯತಿ, ಪುರಸಭೆ ಹಾಗೂ ಇನ್ನಿತರೆ ಚುನಾಯಿತ ಸದಸ್ಯ ಮಂಡಳಿ ಸಮಾನ್ಯ ಸಭೆಗಳನ್ನು ಸಂಪೂರ್ಣ ಉಪ-ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ನಿಷೇಧಿಸಲಾಗಿದೆ.
ಮತದಾರರಿಗೆ ಪ್ರಭಾವಕ್ಕೊಳಪಡುವ ರಾಜಕೀಯ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಯಾವುದೇ ಸಭೆ ಸಮಾರಂಭಗಳು ಅವಶ್ಯಕವಿದ್ದಲ್ಲಿ ಚುನಾವಣಾಧಿಕಾರಿಗಳ ಪರವಾನಿಗೆ ಪಡೆದ ನಂತರವೇ ಕಾರ್ಯಕ್ರಮ ಆಯೋಜಿಸಬೇಕು.
ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಇಂತಹ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಉಪ-ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತ್ತಿನಲ್ಲಿರಿಸಲಾಗಿದೆ. ಇಂತಹ ವರ್ಗಾವಣೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.
ರಜೆ ನಿರ್ಬಂಧ:
ಜಿಲ್ಲೆಯ ತಾಲ್ಲೂಕಿನ ಹಾಗೂ ಎಲ್ಲಾ ಇಲಾಖಾ, ಕಚೇರಿ ಮುಖ್ಯಸ್ಥರಿಗೆ ರಜೆ ನೀಡುವುದನ್ನು ನಿರ್ಭಂಧಿಸಲಾಗಿದೆ. ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲಾ ಚುನಾವಣಾಧಿಕಾರಿಗಳ ಪರವಾನಿಗೆ ಇಲ್ಲದೇ ರಜೆ ಪಡೆಯುವಂತಿಲ್ಲ ಮತ್ತು ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಹೇಳಿದರು.
ಈ ಉಪ-ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತದಾರರ ಪ್ರಭಾವಕ್ಕೊಳಪಡುವ ಎಲ್ಲಾ ಸರ್ಕಾರದ ಯೋಜನೆಗಳನ್ನು 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿನ ಭಿತ್ತಿ ಪತ್ರಗಳನ್ನು, ಕಟೌಟ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸಲು ಎಲ್ಲಾ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕಕ್ರಮವಹಿಸುವಂತೆ ಈಗಾಗಲೆ ಸೂಚಿಸಲಾಗಿದೆ ಎಂದರು.
ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಪಂಚಾಯತ್, ಸಂಡೂರು ತಾಲ್ಲೂಕು ಪಂಚಾಯತ್ ವತಿಯಿಂದ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸೂಕ್ತ ಪಾತ್ರ ವಹಿಸಬೇಕು. ಚುನಾವಣೆಯನ್ನು ಶಾಂತ ರೀತಿಯಿಂದ ಮುಕ್ತ, ನ್ಯಾಯಸಮ್ಮತವಾಗಿ ಜರುಗುವಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಲು ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಕಟ್ಟುನಿಟ್ಟಾಗಿ ನಿರ್ದೇಶಿಸಲಾಗಿದೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷದವರು, ಸಾರ್ವಜನಿಕರು ಸಹ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend