ಹೊಳಲ್ಕೆರೆ : ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಕ್ಷರ ದಾಸೋಹ, ಅಜೀಂ ಪ್ರೇಂಜಿ ಫೌಂಡೇಷನ್ ವತಿಯಿಂದ ಪಟ್ಟಣದ ಸಂವಿಧಾನ ಸೌಧದಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ನೀಡುವ ಪೌಷ್ಠಿಕಾಂಶ ಆಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ರಾಜ್ಯ ಸರ್ಕಾರದ ಯೋಜನೆ ಅತ್ಯುತ್ತಮವಾದುದು. ಈಗಾಗಲೆ ಸರ್ಕಾರ ಮಕ್ಕಳಿಗೆ ಪಠ್ಯ ಪುಸ್ತಕ. ಶೂ, ಸಾಕ್ಸ್ ನೀಡುತ್ತಿದೆ. ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಂದೆ-ತಾಯಿ, ಗುರು-ಹಿರಿಯರು ಹಾಗೂ ನೀವುಗಳು ಓದಿದ ಶಾಲೆಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು. ಪಟ್ಟಣದಲ್ಲಿ ಗುಣಮಟ್ಟದ ಶಾಲಾ-ಕಾಲೇಜು, ಸ್ಟೇಡಿಯಂ, ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಿಸಲಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳು ನಿಮಗೆ ತಲುಪಲಿ. ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಹೇಳಿಕೊಡುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಶಿಕ್ಷಕರುಗಳಿಗೆ ಸೂಚಿಸಿದರು.
ಪುರುಸಭೆ ಸದಸ್ಯರುಗಳಾದ ಆರ್.ಎ.ಅಶೋಕ್, ಸುಧಾ ಬಸವರಾಜ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030