ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮವಹಿಸಲು ಸೂಚನೆ
ಹಾಸನ : ಅಕ್ರಮವಾಗಿ ಮದ್ಯ ಮಾರಾಟ, ನಿಗದಿತ ಅವಧಿಗೆ ಮುನ್ನ ಅಂಗಡಿ ಬಾಗಿಲು ತೆರೆಯುವುದು ಹಾಗೂ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜೀತ ವಿಮುಕ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಜಾಗ ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪುನರ್ವಸತಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮವಹಿಸುವಂತೆ ತಿಳಿಸಿದರು.
ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ನಕಲಿ ಅಂಕಪಟ್ಟಿ ನೀಡಿರುವವರ ವಿರುದ್ಧ ಕ್ರಮ ಕೈಗೊಂಡು ದಾಖಲೆ ಸಹಿತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಾಬು ಜಗಜೀವನರಾಂ ಭವನ ಮತ್ತು ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವಂತೆ ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ಕುರಿತು ಜನರಿಗೆ ಮಾಹಿತಿ ನೀಡಿ ಅರಿವು ಮೂಡಿಸುವ ಮೂಲಕ ದೌರ್ಜನ್ಯ ನಡೆಯದಂತೆ ತಡೆಯಲು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು.
ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಉಪ ವಿಭಾಗಾಧಿಕಾರಿ ಶೃತಿ, ಸಮಾಜ ಕಲ್ಯಾಣಾಧಿಕಾರಿ ದೂದ್ ಫೀರ್ ಸಮಿತಿ ಸದಸ್ಯರಾದ ಮರಿ ಜೋಸೆಫ್ ,ಮಲ್ಲೇಶ್,ಶಿವಮ್ಮ, ನವೀನ್ ಸದಾ, ಬೈರೇಶ್, ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030