ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಬಗ್ಗೆ ನಿಗಾ ವಹಿಸಿ: ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್
ಬೆಂಗಳೂರು ನಗರ ಜಿಲ್ಲೆ,: ಸಾರ್ವಜನಿಕರ ಸ್ಥಳಗಳಲ್ಲಿ ಗ್ರಾಮ ಪಂಚಾಯಿತಿಗಳು ಸ್ವಚ್ಛತೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ರಸ್ತೆ ಬದಿಯಲ್ಲಿ ಕಸ ಹಾಕುವವರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಿಗೆ ಸೂಚನೆ ನೀಡಿದರು.
ಅವರು ಇಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು/ಉಪಾಧ್ಯಕ್ಷರ ಸಮ್ಮೇಳನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ರಸ್ತೆ ಬದಿಗಳಲ್ಲಿ ಕಸ ಹಾಕದಂತೆ ಸಾರ್ವಜನಿಕರಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಅರಿವು ಮೂಡಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮಗಳಲ್ಲಿ ಹಮ್ಮಿಕೊಳ್ಳಬೇಕು ಎಂದ ಅವರು ರಸ್ತೆ ಬದಿಗಳಲ್ಲಿ ಕಸ ಹಾಕುವವರನ್ನು ಗುರುತಿಸಿ ಅವರ ವಿರುದ್ದ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 18 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಆಸ್ತಿ ಖಾತಾ ವರ್ಗಾವಣೆ, ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ, ರಸ್ತೆ ನಿರ್ಮಾಣದ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿದೆ. ಈ ಬಗ್ಗೆ ಕಾನೂನು ರೀತಿಯಲ್ಲಿ ಪರಿಹಾರ ಒದಗಿಸಿ, ಬಡವರಿಗೆ ಇರುವ ಸರ್ಕಾರದ ಯೋಜನೆಗಳನ್ನು ನೇರವಾಗಿ ಅವರಿಗೆ ತಲುಪುವಂತೆ ಕ್ರಮ ವಹಿಸಬೇಕು. ಯಾವುದೇ ರೀತಿಯಲ್ಲೂ ಬಡವರಿಗಾಗಿ ಮೀಸಲಿಟ್ಟ ಯೋಜನೆಗಳ ಹಣವನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಸ್ ಲತಾ ಕುಮಾರಿ ಅವರು ಮಾತನಾಡಿ ದೇಶ ಅಭಿವೃದ್ಧಿ ಹೊಂದಬೇಕೆಂದರೆ ಗ್ರಾಮಗಳು ಅಭಿವೃದ್ಧಿಯಾಗಬೇಕು. ಗ್ರಾಮಗಳಲ್ಲಿರುವ ಶಾಲಾ-ಕಾಲೇಜು ವಸತಿ ನಿಲಯಗಳಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೂಲ ಸೌಕರ್ಯದ ಸಮಸ್ಯೆ ಇದ್ದಲ್ಲಿ ಅದನ್ನು ಪರಿಹರಿಸಿ ಅಭಿವೃದ್ಧಿಪಡಿಸಬೇಕು. ಶಾಲೆಗಳ ಸುತ್ತಲು ಕಡ್ಡಾಯವಾಗಿ ಕಾಂಪೌಂಡ್ ಮತ್ತು ಗೇಟ್ ಗಳನ್ನು ಅಳವಡಿಸಬೇಕು ಎಂದ ಅವರು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಸವಲತ್ತು ಬೇಕಾದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಹಾಯವಾಣಿಯನ್ನು ತೆರೆಯಬೇಕು ಹಾಗೂ ಅಲ್ಲಿ ನಡೆಯುವ ಅಭಿವೃದ್ಧಿ ಕೆಲಸಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಅನಿತಾ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ಎಲ್. ಮೋಹನ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿಯ ಅಧ್ಯಕ್ಷರು, ಉಪಧ್ಯಕ್ಷರುಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030