ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಚರಣೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ
ಐತಿಹಾಸಿಕ ಕೋಟೆಯಲ್ಲಿ ಸ್ವಚ್ಛತಾ ಕಾರ್ಯ
ಚಿತ್ರದುರ್ಗ:ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ನಗರಸಭೆ ವತಿಯಿಂದ ಮಂಗಳವಾರ ನಗರದ ಐತಿಹಾಸಿಕ ಕೋಟೆ ಆವರಣದೊಳಗೆ ಸ್ವಚ್ಛತಾ ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಐತಿಹಾಸಿಕ ಕೋಟೆ ಆವರಣದೊಳಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಖುದ್ದು ಪಾಲ್ಗೊಂಡು, ಸ್ವಚ್ಛತೆ ಕಾರ್ಯ ನೆರವೇರಿಸಿದರು.
ಜಿಲ್ಲಾಧಿಕಾರಿಗಳು ಖುದ್ದು ಕೈಗವಸು ಧರಿಸಿ, ಸ್ವಚ್ಛತಾ ಕಾರ್ಯಕ್ಕಿಳಿದು, ವಿದ್ಯಾರ್ಥಿಗಳನ್ನು ಸ್ವಚ್ಛತಾ ಕಾರ್ಯಕ್ಕೆ ಹುರಿದುಂಬಿಸಿದರು. ಕೋಟೆ ಆವರಣದಲ್ಲಿ ಅಲ್ಲಲ್ಲಿ ಬಿದ್ದಿದ್ದ ಕಸವನ್ನು ಆಯ್ದು, ಒಂದೆಡೆ ಸಂಗ್ರಹಿಸಿ ನೀಡುವ ಕಾರ್ಯದಲ್ಲಿ ಚುರುಕಿನಿಂದ ಪಾಲ್ಗೊಂಡರು. ಸ್ವಚ್ಛತಾ ಕಾರ್ಯಕ್ಕೆ ಆಗಮಿಸಿದ್ದ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ವಾಯುವಿಹಾರಿಗಳು, ಪ್ರವಾಸಿ ಮಿತ್ರರು ಕೋಟೆ ಆವರಣದಲ್ಲಿನ ಸ್ವಚ್ಛತೆಗೆ ಕೈಜೋಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸಲು ಕಳೆದ ಸೆ.14 ರಿಂದ “ಸ್ವಚ್ಛತಾ ಹೀ ಸೇವಾ ಪಾಕ್ಷಿಕ” ಅಭಿಯಾನ ಆರಂಭಗೊಂಡಿದ್ದು, ಅಕ್ಟೋಬರ್ 01 ರವರಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪ್ರತಿನಿತ್ಯವೂ ಸ್ವಚ್ಛತಾ ಅಭಿಯಾನಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನವು ಕೇವಲ ಆ ದಿನಕ್ಕೆ ಸೀಮಿತಗೊಳಿಸಬಾರದು. ಇದು ನಿರಂತರವಾಗಿರಬೇಕು. ಈ ಅಭಿಯಾನದ ಮೂಲಕ ಸ್ವಚ್ಛತೆ ಕಾಪಾಡುವ ಜತೆಗೆ ಜನರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವುದಾಗಿದೆ. ಇದರಿಂದ ಸುಂದರ ನಗರ ನಿರ್ಮಾಣ ಹಾಗೂ ಉತ್ತಮ ಪರಿಸರ, ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ನಗರಸಭೆ ವತಿಯಿಂದ ಐತಿಹಾಸಿಕ ಕೋಟೆಯಲ್ಲಿ ಸ್ವಚ್ಛತಾ ಸೆಲ್ಫಿ ಪಾಯಿಂಟ್ಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಸೆಲ್ಫಿಗಳನ್ನು ತೆಗೆದುಕೊಳ್ಳಲು ಉತ್ತೇಜನ ನೀಡಲಾಯಿತು. ಇದೇ ಸಂದರ್ಭದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಅವರು ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸಾಹಸಿ ಜ್ಯೋತಿರಾಜ್, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ್ ಸೇರಿದಂತೆ, ನೆಹರು ಯುವ ಕೇಂದ್ರ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಡಾನ್ ಬಾಸ್ಕೋ ಪದವಿ ಕಾಲೇಜು ಎನ್ಎಸ್ಎಸ್ ವಿದ್ಯಾರ್ಥಿಗಳು ಮತ್ತು ಚಿತ್ರ ಡಾನ್ ಬಾಸ್ಕೋ ಯುವ ತಾರೆಗಳು ಸೇರಿದಂತೆ ಸಾರ್ವಜನಿಕರು, ಪ್ರವಾಸಿಗರು, ಪ್ರವಾಸಿ ಮಿತ್ರರು, ವಾಯುವಿಹಾರಿಗಳು, ಪೌರಕಾರ್ಮಿಕರು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030