ಪ್ರತಿಯೊಬ್ಬರು ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ : ಬಿ.ಆರ್ ಪೂರ್ಣಿಮಾ
ಹಾಸನ :- ಪ್ರತಿಯೊಬ್ಬರು ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಅವರು ಸಾರ್ವಜನಿಕರಿಗೆ ತಿಳಿಸಿದರು.
ಸಾಲಗಾಮೆ ಗ್ರಾಮ ಪಂಚಾಯಿತಿ ಅವರಣದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲಾದ್ಯಂತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು, ಆಸ್ಪತ್ರೆಗಳ ಸಿಬ್ಬಂದಿಗಳು ಪ್ರತಿಯೊಬ್ಬರು ಗ್ರಾಮೀಣ ಭಾಗದ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಚರಂಡಿ, ಬೀದಿಗಳು, ಶಾಲಾ ಆವರಣ, ಚಹಾದ ಅಂಗಡಿ ಮುಂತಾದ ಕಡೆ ಸ್ವಚ್ಚತೆ ಮಾಡಿ ಡೆಂಗ್ಯೂ ಪ್ರಕರಣಗಳನ್ನ ತಡೆಗಟ್ಟಲು ಸಾಕಷ್ಟು ಶ್ರಮಿಸಿದ್ದಾರೆ ಅದರ ಮೂಲಕ ಡೆಂಗ್ಯೂ ಪ್ರಕರಣಗಳನ್ನ ತಡೆಗಟ್ಟಲು ಸಹಕಾರಿಯಾಯಿತು ಎಂದು ಅವರು ಹೇಳಿದರು.
ತಿಂಗಳ ಪ್ರತಿ ಮೂರನೇ ಶನಿವಾರ ಸ್ವಚ್ಚತೆ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಇದರೊಂದಿಗೆ ನಾಗರಿಕರು ಸಹ ಕೈ ಜೋಡಿಸಬೇಕು ಎಂದು ತಿಳಿಸಿದರು.
ಹಸಿ ಕಸ, ಒಣ ಕಸವನ್ನು ವಿಂಗಡಣೆ ಮಾಡಿ ಮನೆಗಳ ಬಳಿ ಬರುವಂತಹ ಆಟೋಗಳಿಗೆ ಹಾಕುವ ಮೂಲಕ ಸ್ವಚ್ಚತೆ ಕಾಪಾಡಿ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಅವರು ಮಾತನಾಡಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಚತೆ ಕಾರ್ಯಕ್ರಮ ಆಯೋಜನೆ ಹಮ್ಮಿಕೊಂಡಿದ್ದು ಸ್ವಚ್ಚತೆಗೆ ಹೆಚ್ಚಿನ ಮಹತ್ವವನ್ನು ನೀಡಲಿದ್ದೇವೆ ಎಂದು ಅವರು ತಿಳಿಸಿದರು.
ಪ್ರತಿ ಮನೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕು ಅದನ್ನೇ ಬಳಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಮಣ್ಣಿನ ಕಲುಷಿತ, ಭೂಮಿಯ ಫಲವತ್ತತೆ ಮೇಲೆ ಬೀರುವ ದುಷ್ಪರಿಣಾಮಗಳು ಹಾಗೂ ದ್ರವ ರೂಪದ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರಲ್ಲದೆ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಿದರು.
ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿದರೆ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಹಾಗೂ ಹೆಚ್ಚು ಜೀವಿತಾವಧಿ ಜೀವಿಸಬಹುದು ಎಂದರಲ್ಲದೆ ಪ್ರತಿಯೊಬ್ಬರು ಸಾಕಷ್ಟು ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ, ನಿರ್ಮಾಣಕ್ಕೆ ಪಾತ್ರರಾಗಬೇಕು ಎಂದರು.
ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಹೆಚ್.ಡಿ ಅವರು ಮಾತನಾಡಿ ಪ್ರತಿಯೊಬ್ಬರು ಸ್ವಚ್ಚತೆ ಕಾಪಾಡುವಿಕೆಗೆ ಮೊದಲ ಆದ್ಯತೆ ನೀಡಬೇಕು ತಮ್ಮ ಮನೆಗಳ ಮುಂದೆ, ಊರಿನಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ಎಲ್ಲರೂ ಮುಂದಾಗಬೇಕು ಎಂದರು. ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.
ಪ್ರತಿಜ್ಞಾ ವಿಧಿ ಸ್ವೀಕಾರ :- ಪ್ಪಾಸ್ಟಿಕ್ ಬಳಕೆ ನಿಷೇಧ, ಸ್ವಚ್ಚತೆ ಮತ್ತು ಪರಿಸರ ಕಾಪಡುವಿಕೆಯ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಮುಖ್ಯ ಲೆಕ್ಕಾಧಿಕಾರಿ ತಫಜುಲ ಹುಸೇನ್, ಪ್ರಾಜೆಕ್ಟ್ ಡೈರೆಕ್ಟರ್ ಚಂದ್ರಮೌಳಿ, ಹಾಸನ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ (ಉಖಾಯೋ) ದಿನೇಶ್, ಸಾಲಗಾಮೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುಕ್ಮಿಣಿ, ಉಪಾಧ್ಯಕರು, ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತ ಬೈರಪ್ಪ , ಕಾರ್ಯದರ್ಶಿ, ಸಾಲಗಾಮೆ ಹೋಬಳಿ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಹಾಗೂ ಮತ್ತಿತರರು ಹಾಜರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030